ಹಾವೇರಿ: ಗಣೇಶ ಚರ್ತುಥಿ ಹಾಗೂ ಈದ್ ಮೀಲಾದ್ ಹಬ್ಬ ಆಚರಣೆ ಸಮಯದಲ್ಲಿ ಜಿಲ್ಲಾಡಳಿತ ಹೊರಡಿಸುವ ಮಾರ್ಗಸೂಚಿ ಪ್ರಕಾರ ಎಲ್ಲರೂ ನಡೆದುಕೊಳ್ಳಬೇಕು. ಎಲ್ಲರೂ ಕಾನೂನು ಪಾಲನೆ ಮಾಡುವ ಮೂಲಕ ಹಬ್ಬ ಆಚರಿಸಬೇಕು. ಇಲ್ಲವಾದರೆ ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ತಿಳಿಸಿದರು.
ಇಲ್ಲಿಯ ಜಿಪಂ ಸಭಾಭವನದಲ್ಲಿ ಸೋಮವಾರ ಶ್ರೀ ಗಣೇಶ ಚರ್ತುಥಿ ಹಾಗೂ ಈದ್ ಮೀಲಾದ್ ಹಬ್ಬದ ನಿಮಿತ್ತ ಏರ್ಪಡಿಸಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಗಣೇಶ ವಿಸರ್ಜನಾ ಮೆರವಣಿಗೆಯು ಸಾಗುವ ಮಾರ್ಗದಲ್ಲಿಯೇ ತೆರಳಬೇಕು. ಹೊಸ ಮೆರವಣಿಗೆಯ ಮಾರ್ಗಕ್ಕೆ ಅನುಮತಿ ಇರುವದಿಲ್ಲ. ಧ್ವನಿವರ್ಧಕ ಬಳಕೆಗೆ ಅನುಮತಿ ನೀಡುತ್ತಿದ್ದು, ಆಯೋಜಕರು ಸಂಬಂಧಪಟ್ಟ ಠಾಣೆಗಳಿಂದ ಅನುಮತಿ ಪಡೆದುಕೊಳ್ಳಬೇಕು. ಧ್ವನಿವರ್ಧಕಗಳನ್ನು ನ್ಯಾಯಾಲಯದ ಆದೇಶದಂತೆ ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಬಳಸುವಂತಿಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ ಆಯೋಜಕರು ಹಾಗೂ ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ಧರ್ಮ ವಿರೋಧಿ ಪೋಸ್ಟ್ ಗಳನ್ನು ಹಾಗೂ ಬ್ಯಾನರ್, ಬಂಟಿಂಗ್ಸ್ ಳಲ್ಲಿ ಕಾನೂನು ಬಾಹಿರ ವಿಷಯಗಳ ಕುರಿತು ನಮೂದಿಸದಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ 2 ಸಾವಿರಕ್ಕಿಂತ ಹೆಚ್ಚು ಸಾರ್ವಜನಿಕ ಗಣೇಶ ವಿಗ್ರಹಗಳು ಪ್ರತಿಷ್ಠಾಪನೆಗೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ಸಾರ್ವಜನಿಕರು, ಗಣೇಶ ಆಯೋಜಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದರು.
ಗಣೇಶ ವಿಸರ್ಜನಾ ಸ್ಥಳಗಳಲ್ಲಿ ಲೈಟಿಂಗ್, ಸ್ವಚ್ಛತೆ, ಸಿಸಿ ಟಿವಿ ಕ್ಯಾಮರಾ ಅಳವಡಿಕೆ ಮುಂತಾದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಪಟ್ಟ ಇಲಾಖೆಗೆ ಈಗಾಗಲೇ ಈ ಬಗ್ಗೆ ಕ್ರಮವಹಿಸಲು ತಿಳಿಸಲಾಗಿದೆ. ಆಯೋಜಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಸೇವಕರನ್ನು ನೇಮಕಮಾಡಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಗೌರಿ ಗಣೇಶ ಹಬ್ಬ ಹಾಗೂ ಈದ್-ಮೀಲಾದ್ ಹಬ್ಬವನ್ನು ಹಿಂದು&ಮುಸ್ಲಿಂ ಸಮುದಾಯದವರು ಭಾವೈಕ್ಯತೆಯಿಂದ ಆಚರಿಸಬೇಕು. ಎಲ್ಲ ಸಮುದಾಯದವರು ಕಾನೂನಿನ ಅಡಿಯಲ್ಲಿ ಸಂಯಮ, ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕು. ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ವಿಗ್ರಹಗಳನ್ನು ಬಳಸಬಾರದು. ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ ಶಿರಕೋಳ, ಜಿಲ್ಲೆಯ ಉಪ ವಿಭಾಗಾಧಿಕಾರಿಗಳು, ತಹಸೀಲ್ದಾರ್ರು, ಸ್ಥಳಿಯ ಸಂ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗಣೇಶ ಹಬ್ಬದ ಆಯೋಜಕರು, ಮುಸ್ಲಿಂ ಸಮಾಜದ ಮುಖಂಡರು ಸಭೆಯಲ್ಲಿದ್ದರು.